ಜಾಲಿ ರೈಡ್ ಮುಗಿಸಿಕೊಂಡು ಹಿಂತಿರುಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ.
ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಮೃತಪಟ್ಟಿದ್ದು, ಸಿರಿಕೃಷ್ಣ ಮತ್ತು ಅಂಕಿತಾ ರೆಡ್ಡಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದ್ದು, ಡಿವೈಡರ್ ಹಾರಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಮೃತ ವಿದ್ಯಾರ್ಥಿಗಳು ಜಾಲಿ ರೈಡ್ ಗೆ ತೆರಳಿ, ವಾಪಾಸ್ ಆಗುತ್ತಿದ್ದರೆಂದು ತಿಳಿದು ಬಂದಿದೆ.
ಈ ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಹೊಸಕೋಟೆ ಠಾಣೆ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.