ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ, ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಕೊಲ್ಕತ್ತಾ, ಪಂಜಾಬ್, ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮುಸಲ್ಮಾನರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕಲ್ಲು ತೂರಾಟ, ಪೊಲೀಸರೊಂದಿಗೆ ಘರ್ಷಣೆ ನಡೆದಿದೆ.
ಉತ್ತರ ಪ್ರದೇಶದ ಹಲವೆಡೆ ಮಧ್ಯಾಹ್ನದ ನಮಾಜ್ ಮುಗಿಸಿ ಮಸೀದಿಯಿಂದ ಹೊರ ಬಂದ ಮುಸ್ಲಿಮರು ಏಕಾಏಕಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಕೆಲವೆಡೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ನಡೆಸಿದರು. ಹೆಚ್ಚುವರಿ ಪೊಲೀಸ್ ಪಡೆ ಕರೆಸಿಕೊಳ್ಳುವ ವೇಳೆಗೆ ಕೆಲವೆಡೆ ವಾಹನಗಳಿಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು, ನೂಪುರ್ ಶರ್ಮಾ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : – ನೋಟುಗಳ ಮೇಲೆ ಮಹಾತ್ಮಾ ಗಾಂಧಿ ಚಿತ್ರ ಮುಂದುವರೆಯಲಿದೆ – ಆರ್ ಬಿಐ ಸ್ಪಷ್ಟನೆ
ಹೈದರಾಬಾದ್ ನ ಚಾರ್ಮಿನಾರ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ನಡೆಸಿದ್ದಾರೆ. ನೂಪುರ್ ಶರ್ಮಾ ವಿರುದ್ಧ ಘೋಷಣೆ ಕೂಗಿದ ಮುಸ್ಲಿಮರು, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು.
ರಾಂಚಿಯಲ್ಲಿ ಪ್ರತಿಭಟನಾ ನಿರತ ಮುಸ್ಲಿಮರು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ದೊಣ್ಣೆಗಳಿಂದ ವಾಹನಗಳ ಗಾಜು ಧ್ವಂಸಗೊಳಿಸಿದ್ದಾರೆ. ಅಷ್ಟೇ ಅಲ್ಲ, ವಾಹನಗಳಿಗೂ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.
ಪಶ್ಚಿಮ ಬಂಗಾಳದ ಹೌರಾದಲ್ಲೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಮುಸ್ಲಿಮರು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಹೀಗಾಗಿ ಅಶ್ರುವಾಯು ಸಿಡಿಸಿ, ಲಾಠಿ ಬೀಸಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 2 ವಾರಗಳ ಹಿಂದೆ ನೂಪುರ್ ಶರ್ಮಾ ಟಿವಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ : – ₹2000 ನೋಟುಗಳ ಸಂಖ್ಯೆ ಭಾರೀ ಇಳಿಕೆ! ಕುತೂಹಲ ಕೆರಳಿಸಿದ ಮೋದಿ ನಡೆ..!