ದಕ್ಷಿಣ ಕನ್ನಡ : ಆಗಸ್ಟ್ 01 ಉಡುಪಿ, ಮಂಗಳೂರು ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಡಲು ಕೊರೆತದ ಸಮಸ್ಯೆ ಇದ್ದು, ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸೋಮೇಶ್ವರ ಬಟ್ಟಪಾಡಿಯಲ್ಲಿ ಸಮುದ್ರ ಕೊರೆತದ ವೀಕ್ಷಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಟ್ಟಪಾಡಿಯಲ್ಲಿ ಮನೆಗಳಿಗೆ ಹಾನಿಯಾಗಿವೆ . ಕಳೆದ ವರ್ಷವೂ ಕಡಲ ಕೊರೆತವಾಗಿದ್ದು, ಈ ವರ್ಷವೂ ಆಗಿದೆ. ಕಲ್ಲುಗಳನ್ನು ಹಾಕಿ ಕೇವಲ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳಲಾಗಿದೆ. ಪುನಃ ಕಡಲ ಕೊರೆತ ಉಂಟಾಗುತ್ತಲೇ ಇರುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದರು.
ಕಡಲು ಕೊರೆತದಿಂದ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದರು.