ಚಾಮರಾಜನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 28 ರೋಗಿಗಳು ಮೃತಪಟ್ಟಿದ್ದಾರೆ. ಆದರೆ ಸರಕಾರ ಸುಳ್ಳು ಹೇಳಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದಾರೆ.
ಚಾಮರಾಜನಗರಕ್ಕೆ ಮಂಗಳವಾರ ಭೇಟಿ ನೀಡಿ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಆರೋಗ್ಯ ಸಚಿವರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವುದು ಕೇವಲ ಮೂವರು ಮಾತ್ರ ಎಂದು ಹೇಳಿರುವುದು ಶುದ್ಧ ಸುಳ್ಳು ಎಂದಿದ್ದಾರೆ.
ಚಾಮರಾಜನಗರ ಆಸ್ಪತ್ರೆಯಲ್ಲಿ 24 ಅಲ್ಲ, 28 ಜನರು ಮೃತಪಟ್ಟಿರುವುದು ಆಮ್ಲಜನಕದ ಕೊರತೆಯಿಂದ ಎಂಬುದು ಮಾಹಿತಿ. ಆದರೆ ಆರೋಗ್ಯ ಸಚಿವರು ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.