ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ.
–ಬಿ ಎಸ್ ಯಡಿಯೂರಪ್ಪ, ಮುಖ್ಯಮಂತ್ರಿಗಳು
ಸ್ವಾತಂತ್ರ್ಯ ಹೋರಾಟಗಾರರು, ಪತ್ರಕರ್ತರು, ಶತಾಯುಷಿಗಳಾದ ಶ್ರೀ ಹೆಚ್. ಎಸ್. ದೊರೆಸ್ವಾಮಿಯವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ತಮ್ಮ ಜೀವನದುದ್ದಕ್ಕೂ ಸಮಾಜದ ಏಳಿಗೆಗೆ ದುಡಿದ ಒಬ್ಬ ಮಹಾನ್ ಸಾಮಾಜಿಕ ಹೋರಾಟಗಾರರನ್ನು ಕಳೆದುಕೊಂಡು ನಮ್ಮ ರಾಜ್ಯ ಇಂದು ಬಡವಾಗಿದೆ.
– ಹೆಚ್ ಡಿ ದೇವೇಗೌಡ, ಮಾಜಿ ಪ್ರಧಾನಮಂತ್ರಿ
ನಮ್ಮನ್ನು ಅಗಲಿ ಹೋದ ಎಚ್.ಎಸ್.ದೊರೆಸ್ವಾಮಿ ಅವರು ನಮ್ಮೆಲ್ಲರ ಆತ್ಮ ಸಾಕ್ಷಿಯಾಗಿದ್ದರು. ತಪ್ಪು ಕಂಡಾಗ ಎಚ್ಚರಿಸಿ, ಸರಿ ಕಂಡಾಗ ಬೆಂಬಲಿಸುತ್ತಿದ್ದ ಮಾರ್ಗದರ್ಶಕರಾಗಿದ್ದರು. ಇಳಿ ವಯಸ್ಸಿನಲ್ಲಿಯೂ ಜಗ್ಗದೆ, ಕುಗ್ಗದೆ ಅನ್ಯಾಯ-ಅಕ್ರಮ ಕಂಡಾಗ ಬೀದಿಗಿಳಿಯುತ್ತಿದ್ದ ಅವರು ಎಲ್ಲರ ಪಾಲಿನ ಸ್ಪೂರ್ತಿಯಾಗಿದ್ದರು.
– ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ
ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ.
– ಹೆಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ನಾಡಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ಶ್ರೀ ಎಚ್. ಎಸ್. ದೊರೆಸ್ವಾಮಿ ಅವರ ನಿಧನದ ಸುದ್ದಿ ದುಃಖ ತಂದಿದೆ. ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸುದೀರ್ಘ ಸಾರ್ವಜನಿಕ ಜೀವನ ನಡೆಸಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
– ಡಾ. ಸಿ ಎನ್ ಅಶ್ವತ್ಥನಾರಾಯಣ, ಉಪಮುಖ್ಯಮಂತ್ರಿ
ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ.
– ಡಿ ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು
ಸ್ವಾತಂತ್ರ್ಯ ಹೋರಾಟಗಾರರು, ಶತಾಯುಷಿ, ಶ್ರೇಷ್ಠ ಚಿಂತಕರು, ಹಲವು ಚಳುವಳಿಗಳ ನೇತಾರ, ಕನ್ನಡಿಗರ ಸಾಕ್ಷಿಪ್ರಜ್ಞೆಯಾಗಿದ್ದ ಶ್ರೀ ಎಚ್.ಎಸ್. ದೊರೆಸ್ವಾಮಿ ಅವರ ನಿಧನದ ಸುದ್ದಿ ಆಘಾತ ನೀಡಿದೆ. ವೈಚಾರಿಕ ಚಿಂತನೆಯ ಶ್ರೇಷ್ಠ ಕೊಂಡಿಯೊಂದು ಕಳಚಿದೆ. ಅಗಲಿದ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ. ಸದ್ಗತಿಗಾಗಿ ಪ್ರಾರ್ಥಿಸುತ್ತೇನೆ.
– ಲಕ್ಷ್ಮಣ ಸವದಿ, ಉಪಮುಖ್ಯಮಂತ್ರಿ
ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಎಚ್.ಎಸ್. ದೊರೆಸ್ವಾಮಿರವರು ಹೃದಯಾಘಾತದಿಂದ ವಿಧಿವಶರಾದ ಸುದ್ದಿ ಕೇಳಿ ಆಘಾತವಾಯಿತು. ಭಗವಂತ ಶ್ರೀಯುತರ ಆತ್ಮಕ್ಕೆ ಸದ್ಗತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.
– ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷರು