ನಿರ್ಭಯಾ ಪ್ರಕರಣದ ಬಳಿಕ ಇಡೀ ದೇಶವನ್ನ ಬೆಚ್ಚಿಬೀಳಿಸಿದ್ದ ಹೈದರಾಬಾದ್ ನಲ್ಲಿ ಪಶುವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಈಗ ಮತ್ತೆ ಸುದ್ದಿಯಲ್ಲಿದೆ. ತೆಲಂಗಾಣದ ಹೈದರಾಬಾದ್ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಹೆಸರಿನಲ್ಲಿ ಉದ್ದೇಶಪೂರ್ವಕವಾಗಿ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿ ತನ್ನ ವರದಿಯಲ್ಲಿ ಈ ರೀತಿ ಹೇಳಿದೆ.
ನ್ಯಾಯಮೂರ್ತಿ ವಿಎಸ್ ಸಿರ್ಪುರ್ಕರ್ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ನೇಮಿಸಿದ್ದ ಸಮಿತಿ ಪ್ರಕರಣದ ತನಿಖೆಯಲ್ಲಿ ಸ್ಪಷ್ಟ ಲೋಪವನ್ನು ಎತ್ತಿ ತೋರಿಸಿದೆ. ಆರೋಪಿಗಳನ್ನು ಎನ್ ಕೌಂಟರ್ ಮಾಡಿದ 10 ಪೊಲೀಸರನ್ನು ಕೊಲೆ ಆರೋಪದ ಮೇಲೆ ವಿಚಾರಣೆಗೆ ಒಳಪಡಿಸಲು ಶಿಫಾರಸು ಮಾಡಿದೆ. ಜೊತೆಗೆ ಹತ್ಯೆಯಾದ ನಾಲ್ವರಲ್ಲಿ ಮೂವರು ಅಪ್ರಾಪ್ತ ವಯಸ್ಕರಾಗಿದ್ದರು ವರದಿ ಹೇಳಿದೆ. ಪ್ರಕರಣದಲ್ಲಿ ಜೋಲು ಶಿವ, ಜೋಲು ನವೀನ್ ಮತ್ತು ಚಿಂತಕುಂಟಾ ಚೆನ್ನಕೇಶವುಲು ಅವರು ಅಪ್ರಾಪ್ತರಾಗಿದ್ದರು ಎಂದು ಸಮಿತಿ ತಿಳಿಸಿದೆ. ಇದನ್ನೂ ಓದಿ :- ಗಣಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ಸುಪ್ರೀಂಕೋರ್ಟ್ ..!
2019 ರ ನವೆಂಬರ್ನಲ್ಲಿ ಪಶು ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ಮೊಹಮ್ಮದ್ ಆರಿಫ್, ಚಿಂತಕುಂಟಾ ಚೆನ್ನಕೇಶವುಲು, ಜೋಲು ಶಿವ ಮತ್ತು ಜೊಲ್ಲು ನವೀನ್ ಅವರನ್ನು ಬಂಧಿಸಲಾಗಿತ್ತು. ಸ್ಥಳ ಪರಿಶೀಲನೆ ವೇಳೆ ನಾಲ್ವರು ಆರೋಪಿಗಳನ್ನು ಹೈದರಾಬಾದ್ ಬಳಿ ಎನ್ ಹೆಚ್ -44 ನಲ್ಲಿ ಎನ್ಕೌಂಟರ್ ಮಾಡಲಾಗಿತ್ತು. ನವೆಂಬರ್ 27, 2019 ರಂದು ಮಹಿಳಾ ಪಶುವೈದ್ಯರನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದರು. ಬಳಿಕ ಆರೋಪಿಗಳು ಮಹಿಳೆಯ ದೇಹವನ್ನು ಸುಟ್ಟು ಹಾಕಿದ್ದರು.
ಇದನ್ನೂ ಓದಿ :- ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ- ಮುಂಬೈನಲ್ಲಿ ತುರ್ತು ಭೂಸ್ಪರ್ಶ