ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ ರಾಜಕೀಯ ಬಣ್ಣ ಪಡೆದಿದ್ದು, ಹಿಜಾಬ್ ವಿವಾದದ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಭಾರತಿ ಕಾಲೊನಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಭಾನುವರ ದುಷ್ಕರ್ಮಿಗಳ ಗುಂಪು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ರಾತ್ರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಭಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ. ಕೂಡಲೇ ಯುವಕನನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿಸಿತಾದರೂ ಚಿಕಿತ್ಸೆ ಫಲಿಸದೇ ಹರ್ಷ ಪ್ರಾಣಬಿಟ್ಟಿದ್ದಾನೆ.
ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಘಟನೆ ಬೆನ್ನಲ್ಲೇ ಸೀಗೆಹಟ್ಟಿ ಭಾಗದಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್ಪಿ ಲಕ್ಷ್ಮಿಪ್ರಸಾದ್ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.
ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಯಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದೇ ವೇಳೆ ಹರ್ಷ ಕೊಲೆ ಪ್ರಕರಣಕ್ಕೆ ಮತೀಯ ಬಣ್ಣ ಬಳಿಯಲಾಗುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಪರಸ್ಪರ ಆರೋಪ ಮತ್ತು ಪ್ರತ್ಯಾರೋಪದಲ್ಲಿ ತೊಡಗುವ ಮೂಲಕ ಪ್ರಕರಣ ರಾಜಕೀಯ ಬಣ್ಣ ಪಡೆಯುತ್ತಿದೆ.