ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್‌ ಬೆಡ್ ವ್ಯವಸ್ಥೆ:‌ ಡಿಸಿಎಂ ಅಶ್ವತ್ಥನಾರಾಯಣ

ರಾಮನಗರ: ಇಲ್ಲಿನ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿತರಿಗಾಗಿ ಮೊದಲ ಹಂತದಲ್ಲಿ 150 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದಲೇ ಈ ಬೆಡ್ ಗಳ ಬಳಕೆಯನ್ನು ಹಂತಹಂತವಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಎರಡನೇ ಹಂತದಲ್ಲಿ, ಅಂದರೆ; 15 ದಿನಗಳಲ್ಲಿ ಇನ್ನು 150 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಅಲ್ಲಿಗೆ ಒಟ್ಟು 300 ಆಕ್ಸಿಜನ್‌ ಬೆಡ್‌ಗಳಾಗುತ್ತವೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ ಪಾಸಿಟೀವ್‌ ಪ್ರಕರಣಗಳ ತಡೆಗೆ ಎಲ್ಲ ಕ್ರಮ ವಹಿಸಲಾಗಿದೆ. ಹಾಗೆಯೇ, ಎರಡನೇ ಅಲೆ ಹಾಗೂ ಸಂಭನೀಯ ಮೂರನೇ ಅಲೆ ಬಂದರೂ ಸಮಸ್ಯೆಯಾಗದಂತೆ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಆಕ್ಸಿಜನ್‌ ಬೆಡ್‌ಗಳನ್ನು ಹಾಕಲಾಗುತ್ತಿದೆ. ಜತೆಗೆ, ಕಂದಾಯ ಭವನದಲ್ಲಿ ಈಗ 35 ಆಕ್ಸಿಜನ್‌ ಬೆಡ್‌ ಇದ್ದು, ಅಲ್ಲಿ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ. ಯಾವುದೇ ತುರ್ತು ಸಂದರ್ಭ ಎದುರಾದರೂ ಜಿಲ್ಲಾ ಕೇಂದ್ರದಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಹೋಮ್‌ ಐಸೋಲೇಷನ್‌ ಇಲ್ಲ :

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಇನ್ನು ಮುಂದೆ ಕೋವಿಡ್‌ ಸೋಂಕಿತರನ್ನು ಮನೆಯಲ್ಲಿ ಕ್ವಾರಂಟೈನ್‌ ಮಾಡುವುದಿಲ್ಲ. ಸೋಂಕು ಕಂಡು ಬಂದೊಡನೆ ಅವರನ್ನು ಕೋವಿಡ್‌ ಕೇರ್‌ ಕೇಂದ್ರಗಳಿಗೆ ಶಿಫ್ಟ್‌ ಮಾಡಿ ಆರೈಕೆ ಮಾಡಲಾಗುವುದು. ಅಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಪ್ಯಾರಾ ಮೆಡಿಕಲ್‌ ಸಿಬ್ಬಂದಿ ಇರುತ್ತಾರೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಜಿಲ್ಲಾ ಕೇಂದ್ರದಲ್ಲಿ ಆಮ್ಲಜನಕದ ಕೊರತೆಯೂ ಇಲ್ಲ. ಈಗಾಗಲೇ 6.8 ಟನ್‌ ಸಾಮರ್ಥ್ಯದ ಆಕ್ಸಿಜನ್‌ ಘಟಕ ಮಂಜೂರಾಗಿದೆ. ಸದ್ಯಕ್ಕೆ 3.5 ಕೆ.ಎಲ್‌ನಷ್ಟು ಆಮ್ಲಜನಕ ಬಳಕೆಯಾಗುತ್ತಿದೆ. ಇದರ ಜತೆಗೆ, ಆಮ್ಲಜನಕ ಸಾಂದ್ರಕಗಳು, ಹೆಚ್ಚುವರಿ ಸಿಲಿಂಡರ್‌ಗಳೂ ನಮ್ಮಲ್ಲಿವೆ. ಹೀಗಾಗಿ ಎಲ್ಲೂ ಕೊರತೆ ಎಂಬುದಿಲ್ಲ ಎಂದರು.

ರಾಜ್ಯದಲ್ಲಿ ಒಟು 60 ಸಾವಿರ ಆಕ್ಸಿಜನ್‌ ಬೆಡ್‌ಗಳಿದ್ದು, ಅದರಲ್ಲಿ ಅರ್ಧದಷ್ಟು ಬೆಡ್‌ಗಳು ಬೆಂಗಳೂರು ನಗರದಲ್ಲೇ ಇವೆ. ಇನ್ನೂ ಎಲ್ಲ ತಾಲೂಕು, ಜಿಲ್ಲಾ ಆಸ್ಪತ್ರೆ ಸೇರಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ರಾಮನಗರ ಜಿಲ್ಲೆಯಲ್ಲೂ ಯಾವುದೇ ಸಮಸ್ಯೆ ಇಲ್ಲ. ಅದೇ ರೀತಿ ರೆಮಿಡಿಸಿವರ್‌ ಸೇರಿ ಯಾವ ಔಷಧದ ಕೊರತೆಯೂ ಇಲ್ಲ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ರಾಮನಗರ ತಾಲ್ಲೂಕಿನ ಕಣ್ವ ಪ್ರಾಥಮಿಕ ಆರೋಗ್ಯ ಹಾಗೂ ಸುಗ್ಗನಹಳ್ಳಿಯಲ್ಲಿ ಇರುವ ಆಯುಷ್ ತರಬೇತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಸುಗ್ಗನಹಳ್ಳಿಯಲ್ಲಿ ಕೋವಿಡ್ ಸೋಂಕಿತರಿದ್ದು ಅವರು ಚಿಕಿತ್ಸೆ ಬಗ್ಗೆ ಸ್ಥಳೀಯ ವೈದ್ಯರಿಂದ‌ ಮಾಹಿತಿ ಪಡೆದರು. ರೋಗಿಗಳ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!