ಚಾಮರಾಜನಗರ: ರಾಜ್ಯದಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುತ್ತವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.
ಕಳೆದ ವರ್ಷ ನೀಡಿದ ಎಸ್ಓಪಿ ಯನ್ನೆ ಅಳವಡಿಸಬೇಕಾ ಅಥವಾ ಬೇರೆ ಸುಧಾರಣೆ ಮಾಡಬೇಕಾ ಆರೋಗ್ಯ ಇಲಾಖೆ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಪರೀಕ್ಷೆ ಇನ್ನು ಎರಡು ತಿಂಗಳಿವೆ. ಎಲ್ಲ ಕಡೆಯಿಂದ ಪರೀಕ್ಷೆ ನಡೆಸುವಂತೆ ಒತ್ತಾಯ ಕೇಳಿಬರುತ್ತಿದೆ ಎಂದರು.
ಜೂನ್ 21 ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ನಿಗದಿಯಾಗಿದೆ. ಅಂದರೆ ಇನ್ನೂ ಎರಡು ತಿಂಗಳ ಮೇಲೆ ಒಂದು ವಾರ ಇದೆ. ಪರೀಕ್ಷೆ ನಡೆಸಲು ಕಳೆದ ವರ್ಷ ಆರೋಗ್ಯ ಇಲಾಖೆ ಎಸ್. ಓ.ಪಿ. ನೀಡಿತ್ತು. ಅದನ್ನೇ ಅಳವಡಿಸಿಕೊಳ್ಳಬಹುದೇ ಅಥವಾ ಇನ್ನೂ ಏನಾದರು ಸುಧಾರಣೆ ಮಾಡಬೇಕೆ ಎಂಬ ಬಗ್ಗೆ ಪರಿಶೀಲಿಸಿ ಎಸ್.ಓ.ಪಿ. ನೀಡುವಂತೆ ಆರೋಗ್ಯ ಇಲಾಖೆಯನ್ನು ಕೇಳಿದ್ದೇವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.
ಪರೀಕ್ಷೆ ನಡೆಸುವಂತೆ ಎಲ್ಲಾ ಕಡೆಯಿಂದ ಒತ್ತಾಯ ಬರುತ್ತಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಹ ಪರೀಕ್ಷೆಗಳನ್ನು ನಡೆಸುವಂತೆ ಪತ್ರ ಬರೆದಿದ್ದಾರೆ. ಪರೀಕ್ಷೆಗಳು ಇನ್ನೂ ಎರಡು ತಿಂಗಳಿರುವುದರಿಂದ, ಆಗಿನ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಎಂದರು.
1 ರಿಂದ 9 ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಬಗ್ಗೆ ನಿನ್ನೆ ಚರ್ಚೆ ನಡೆಸಲಾಗಿದೆ. 1 ರಿಂದ 5 ನೇ ತರಗತಿಗಳಿಗೆ ಏನು ಮಾಡಬೇಕು, 6 ರಿಂದ 9 ನೇ ತರಗತಿಗಳಿಗೆ ಏನು ಮಾಡಬೇಕು ಎಂಬ ಬಗ್ಗೆ ಒಂದು ಸ್ಥೂಲ ರೂಪ ಬಂದಿದ್ದು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.