![](https://rajnewskannada.in/wp-content/uploads/2021/03/GT_DEVEGOWDA.jpg)
ನೀನು ಪವರ್ ಫುಲ್ ಎಂಪಿ ಅಲ್ವಾ? ನೀನು ಹೇಳಿದರೆ ಸಿಎಂ, ಪಿಎಂ ಕೂಡ ಮಾತು ಕೇಳ್ತಾರೆ. ನಿನಗೆ ಅಷ್ಟು ತಾಕತ್ತಿದ್ದರೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಿಸು ನೋಡೋಣ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಮಾಜಿ ಸಚಿವ ಜಿ.ಟಿ. ದೇವೇಗೌಡ ಸವಾಲು ಹಾಕಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ವಿರುದ್ಧ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಹುಲಿ ಆಗಲ್ಲ. ಅಷ್ಟು ತಾಕತ್ತಿದ್ದರೆ ಎತ್ತಂಗಡಿ ಮಾಡಲಿ ನೋಡೋಣ ಎಂದರು.
ಪ್ರತಾಪ್ ಸಿಂಹ ಅವರೇ ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿಮಗಿಂತ ಹೆಚ್ಚು ಕೆಲಸ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದರಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ಯಾ ಹೇಳು ಎಂದು ಅವರು ಹೇಳಿದರು.
ಸರಕಾರ ಹಾಗೂ ಅಧಿಕಾರಿಗಳ ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು. ಆಡಳಿತ ಪಕ್ಷದವರಲ್ಲ. ತಾಕತ್ತಿದ್ದರೆ ವರ್ಗಾವಣೆ ಮಾಡಿಸಬೇಕು. ಅದನ್ನ ಬಿಟ್ಟು ಪೇಪರ್ ಸ್ಟೇಟ್ಮೆಂಟ್ ಕೊಟ್ಟು ಗೊಂದಲ ಯಾಕೆ ಮೂಡುಸ್ತೀರಾ? ಜನರು ಮೈಸೂರಿನ ಬಗ್ಗೆ ಆಡಿಕೊಂಡು ನಗುತ್ತಿದ್ದಾರೆ. ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ ಎಂದು ಜಿಟಿಡಿ ಹೇಳಿದರು.
ಸಾ.ರಾ.ಮಹೇಶ್ ಮಾತ್ರ ಮೈಸೂರು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಕಿಡಿಕಾರಿದ ಅವರು, ಒಬ್ಬ ಮಾತ್ರ ಹೀರೋ, ನಾವೆಲ್ಲಾ ಜೀರೋನಾ? ನಾವೆಲ್ಲರೂ ನಮ್ಮ ಸ್ವಂತ ಹಣ ಖರ್ಚು ಮಾಡ್ತಿದ್ದೀವಿ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು ಎಂದು ಸವಾಲು ಹಾಕಿದರು.