ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಮತದಾನದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಚ್ ಬೆಹೆರ್ ಜಿಲ್ಲೆಯ ಮತಗಟ್ಟೆಯೊಂದರಲ್ಲಿ ಸ್ಥಳೀಯರ ಗುಂಪೊಂದು ಹಲ್ಲೆ ನಡೆಸಲು ಮುಂದಾದ ಪರಿಣಾಮ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿದೆ.
ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಹತ್ಯೆಗೀಡಾದವರು ತಮ್ಮ ಬೆಂಬಲಿಗರು ಎಂದು ಟಿಎಂಸಿ ಹೇಳಿದೆ. ಇಂದು 5 ಜಿಲ್ಲೆಗಳ 44 ಕ್ಷೇತ್ರಗಳಲ್ಲಿ ನಡೆದ ಮತದಾನದಲ್ಲಿ ಬೆಳಗ್ಗೆ 12.30ರವರೆಗೆ ಶೇಕಡಾ 41.98ರಷ್ಟು ಮತದಾನವಾಗಿದೆ. ಗಲಭೆ ಮತ್ತು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ವರದಿ ನೀಡುವಂತೆ ಚುನಾವಣಾ ಆಯೋಗ ಸೂಚಿಸಿದೆ.
ಇನ್ನು, ನಾಲ್ಕನೇ ಹಂತದ ಮತದಾನದಲ್ಲಿ ಪಶ್ಚಿಮ ಬಂಗಾಳದಲ್ಲಿ ಇಂದು ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ದಾಖಲೆಯ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಒಟ್ಟು 8 ಹಂತಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ2ರಂದು ಫಲಿತಾಂಶ ಪ್ರಕಟವಾಗಲಿದೆ.