ದಕ್ಷಿಣ ಕನ್ನಡ (Dakshina kannada) ದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ.
ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು ಎಂದು ಬಿಜೆಪಿ ಸರ್ಕಾರ ವಿರುದ್ದ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin kumar kateel) , ಸಚಿವ ಸುನಿಲ್ ಕುಮಾರ್, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ.
ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ ಎಂದು ತಿಳಿಸಿದ್ರು. ಇದನ್ನೂ ಓದಿ : – ಆರೋಪಿಗಳ ಎನ್ ಕೌಂಟರ್ ಗೂ ನಾವು ಸಿದ್ಧ – ಡಾ. ಸಿ.ಎನ್ ಅಶ್ವತ್ಥ್ ನಾರಾಯಣ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪ್ರವೀಣ್ ನೆಟ್ಟಾರ್ ಕಾರು ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆ ನೆರವಾದೀತು ಎಂದಿದ್ದಾರೆ.
ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಬಿಜೆಪಿ ಸರ್ಕಾರ ತೋರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ : – ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಎಸ್ಐಗಳ ಎತ್ತಂಗಡಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮುಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು, ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಸಿಎಂ ಅವರ ಕರ್ತವ್ಯವಾಗಿದೆ.
ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್.ಎಸ್.ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : – ಸರಣಿ ಕೊಲೆ ಪ್ರಕರಣ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿ