ಕೋಲಾರ: ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದೆ. ಕೋಲಾರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಬರಕ್ಕೆ ತುತ್ತಾಗಿರುವ ಕೋಲಾರದಲ್ಲಿ ಮಳೆಯ ಸಿಂಚನವಾದಂತಾಗಿದೆ. ಮುಂಗಾರು ಹಾಗೂ ಹಿಂಗಾರು ಮಳೆ ಕೊರೆತೆಯಿಂದ ಬರಕ್ಕೆ ತುತ್ತಾಗಿರುವ ಕೋಲಾರದಲ್ಲಿ ಬೆಳೆಗಳು ಒಣಗುವ ಸ್ಥಿತಿಯಲ್ಲಿದ್ದವು. ಈಗಾಗಲೇ ಜಿಲ್ಲೆಯ ಆರೂ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕಾಗಿ ಸರ್ಕಾರ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಭರ್ಜರಿ ವರ್ಷಧಾರೆಯಾಗಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಿಟ್ಟೂ ಬಿಡದೆ ಮಳೆ ಸುರಿದಿದೆ. ಸಂಜೆಗೆ ಸುರಿದ ಭಾರಿ ಮಳೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇತ್ತ ಮೈಸೂರಿನಲ್ಲೂ ಮಳೆ ಆರ್ಭಟ ಜೋರಾಗಿತ್ತು. ಸತತ ಒಂದೂವರೆ ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನ- ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿತ್ತು. ಇತ್ತ ದಿಢೀರ್ ಮಳೆಯಿಂದಾಗಿ ಜನರು ಬಸ್ ನಿಲ್ದಾಣಗಳ ಮೊರೆ ಹೋಗಿದ್ದರು.